ಶುಕ್ರವಾರ, ಏಪ್ರಿಲ್ 6, 2018

bEga bAro - vAdirAjaru

ಬೇಗ ಬಾರೋ ವೇಲಾಪುರದ ಚೆನ್ನ - ವಾದಿರಾಜರು 

ಈ ಕೃತಿಯನ್ನು ಆನಂದಭೈರವಿ ರಾಗದಲ್ಲಿ ಇಲ್ಲಿ ಕೇಳಿ


।। ಬೇಗ ಬಾರೋ ಬೇಗ ಬಾರೋ । ವೇಲಾಪುರದ ಚೆನ್ನ ಬೇಗ ಬಾರೋ ।।ಪ।।
।। ಬೇಗ ಬಾರೋ ಬೇಗ ಬಾರೋ । ನೀಲಮೇಘವರ್ಣ ಬಾರೋ ।।ಅ.ಪ।।

।। ಇಂದಿರೆ ರಮಣ ಗೋವಿಂದ ಬೇಗ ಬಾರೋ ।
ನಂದನ ಕಂದ ಮುಕುಂದ ಬೇಗ ಬಾರೋ ।।೧।।

।। ಧೀರ ಉದಾರ ಗಂಭೀರ ಬೇಗ ಬಾರೋ ।
ಹಾರ ಲಂಕಾರ ರಘುವೀರ ಬೇಗ ಬಾರೋ ।।೨।।

।। ಋದ್ಧ ಅನಿರುದ್ಧ ಸುರಾಧಾ  ಬೇಗ ಬಾರೋ ।
ಹದ್ದನೇರಿದ ಪ್ರಸಿದ್ಧ ಬೇಗ ಬಾರೋ ।।೩।।

।। ರಂಗ ಉತ್ತುಂಗ ನರಸಿಂಗ ಬೇಗ ಬಾರೋ ।
ಕಂಗಳೆಸೆವ ಮೋಹನಾಂಗ ಬೇಗ ಬಾರೋ ।।೪।।

।। ಅಯ್ಯ ವಿಜಯ ಸಾಹಾಯ್ಯ ಬೇಗ ಬಾರೋ ।
ಜೀಯ ಫಣೀಶಯ್ಯಾ ಹಯವದನ ಬೇಗ ಬಾರೋ ।।೫।।


ಈ ಕೃತಿಯ ಸರಳ ಕನ್ನಡದಲ್ಲಿನ ಅರ್ಥ

ವಾದಿರಾಜ ಯತಿಗಳು ಶ್ರೀಹರಿಯನ್ನು ಬೇಗ ಬಾರೋ ಎಂದು ಬಗೆಬಗೆಯಾಗಿ ಕರೆಯುತ್ತಿರುವರು ಈ ಕೃತಿಯಲ್ಲಿ. ಬೇಲೂರು ಚೆನ್ನಕೇಶವನಾದ ನೀಲ ಮೋಡಗಳ ಬಣ್ಣದವನಾದ ಹರಿಯೇ ಬೇಗ ಬಾ ಎಂದು ಆದರಿಸಿದ್ದಾರೆ ಪಲ್ಲವಿಯಲ್ಲಿ.
ನುಡಿ ೧: ಇಂದಿರೆ ಅಥವಾ ಲಕ್ಷ್ಮಿಯ ಪ್ರಿಯನಾದ ಗೋವಿಂದನೇ, ನಂದಗೋಪನ ಕಂದನಾದ ಕೃಷ್ಣನೇ ಬೇಗ ಬಾರೋ.
ನುಡಿ ೨: ಧೈರ್ಯವಂತನೇ, ದಾನಶೀಲನೇ, ಗಂಭೀರ ಚರಿತನೇ, ಲಂಕೆಗೆ ಸಮುದ್ರ ದಾಟಿ ಹೋದವನಾದ ರಾಮನೇ ಬೇಗ ಬಾರೋ .
ನುಡಿ ೩: ಭಗವಂತನೇ, ಯಾರಿಂದಲೂ ಹಿಡಿಯಲಾರದವನೇ, ಎಲ್ಲವನ್ನೂ ಉಳ್ಳವನೇ, ಗರುಡವಾಹನನೆಂದು ಪ್ರಸಿದ್ಧನಾದ ಹರಿಯೇ ಬೇಗ ಬಾರೋ.
ನುಡಿ ೪: ರಂಗನಾಥನೇ, ಎಲ್ಲದಕ್ಕಿಂತ ಉತ್ತಮನಾದವನೇ, ನರಸಿಂಹಾವತಾರನೇ, ಕಣ್ಣುಗಳು ತುಂಬಿಕೊಳ್ಳಲು ಸಾಲದ ಚೆಲುವು ಉಳ್ಳವನೇ ಬೇಗ ಬಾರೋ.
ನುಡಿ ೫: ಎಲ್ಲರಿಗೂ ಹಿರಿಯನಾದವನೇ, ಅರ್ಜುನನ ಸಾರಥಿಯಾದವನೇ, ಎಲ್ಲರ ಒಡೆಯನೇ, ಹಾವಿನ ಮೇಲೆ ಮಲಗಿದವನೇ ಹರಿಯೇ ಬೇಗ ಬಾರೋ. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ